ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ)
ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್ ಘೋಷಿಸಿದರು.
ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿಗೆ ಇನ್ನು 3 ವರ್ಷ 4 ತಿಂಗಳ ಅಧಿಕಾರಾವಧಿ ಬಾಕಿ ಉಳಿದಿದೆ. ಅಂದರೆ, 2029ರ ಸೆಪ್ಟೆಂಬರ್ ತಿಂಗಳವರೆಗೆ ಈ ಬ್ಯಾಂಕ್ ಆಡಳಿತ ಮಂಡಳಿಯ ಅವಧಿ ಇರಲಿದ್ದು, ಅಲ್ಲಿಯವರೆಗೂ ನೂತನ ಅಧ್ಯಕ್ಷರು ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬ್ಯಾಂಕ್ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
1955 ರಲ್ಲಿ ಪ್ರಾರಂಭವಾದ ಡಿಸಿಸಿ ಬ್ಯಾಂಕ್, ಕಳೆದ ಸುಮಾರು 70 ವರ್ಷಗಳಿಂದ ಜಿಲ್ಲೆಯ ರೈತಾಪಿ ವರ್ಗದ ಹಿತ ಕಾಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿರುವ 21 ಡಿಸಿಸಿ ಬ್ಯಾಂಕ್ಗಳ ಪೈಕಿ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅತ್ಯುತ್ತಮ ಆರ್ಥಿಕ ಪರಿಸ್ಥಿತಿಯಲ್ಲಿದೆ. ಜಿಲ್ಲಾ ಕೇಂದ್ರದ ಮುಖ್ಯ ಕಚೇರಿ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಒಟ್ಟು 22 ಶಾಖೆಗಳನ್ನು ಬ್ಯಾಂಕ್ ಹೊಂದಿದೆ. ಬ್ಯಾಂಕ್ನಲ್ಲಿ ಒಟ್ಟು 160 ಮಂಜೂರಾದ ಹುದ್ದೆಗಳಿದ್ದು, ಸದ್ಯ 151 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇವಲ 9 ಹುದ್ದೆಗಳು ಮಾತ್ರ ಖಾಲಿ ಇವೆ. ಹಿರಿಯೂರು, ಮೊಳಕಾಲ್ಮುರು ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬ್ಯಾಂಕ್
ಸದ್ಯ ಸ್ವಂತ ಕಟ್ಟಡವನ್ನು ಹೊಂದಿದೆ. ಒಟ್ಟು 422 ಸಹಕಾರ ಸಂಘಗಳು ಬ್ಯಾಂಕ್ನ ಸದಸ್ಯತ್ವ ಹೊಂದಿವೆ. ಬ್ಯಾಂಕ್ನ ಒಟ್ಟು ಶೇರು ಬಂಡವಾಳ ₹106.26 ಕೋಟಿಗಳಾಗಿದ್ದು, ಇದರಲ್ಲಿ ಸರ್ಕಾರದ ಪಾಲು ₹1.41 ಕೋಟಿಗಳಾಗಿದೆ ಎಂದು ತಿಳಿಸಿದರು











