(ಚಿತ್ರದುರ್ಗ)ಜು.16:ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರಿಗಾಗಿ ಮೀಸಲಿಡಲಾಗುತ್ತಿದೆ.
ಜಾಗತಿಕ ‘ಎಲ್-ನಿನೋ’ ಪರಿಣಾಮದಿಂದಾಗಿ ಈ ಬಾರಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೂರುವ ಸಾಧ್ಯತೆ ಇರುವುದರಿಂದ, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಲೇ ರಾಜ್ಯದ ರೈತರಲ್ಲಿ ಮನವಿ ಮಾಡಿದ್ದಾರೆ.
ಜಲಾಶಯದ ನೀರನ್ನು ಅವಲಂಬಿಸಿರುವ ಹಾಗೂ ಅಧಿಕ ನೀರು ಬೇಡುವ ಬೆಳೆಗಳನ್ನು ಸದ್ಯಕ್ಕೆ ಬೆಳೆಯದಂತೆ ರೈತರಲ್ಲಿ ವಿನಂತಿಸಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಕೃಷಿ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಗಳಂತೆ ಕೇವಲ ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಟಿ.ವೆಂಕಟೇಶ್ ಕೋರಿದ್ದಾರೆ.









